#📜ಪ್ರಚಲಿತ ವಿದ್ಯಮಾನ📜
ಭೀಕರ ಅಪಘಾತದಲ್ಲಿ ಮೂವರು ಸಾಫ್ಟ್ವೇರ್ ಇಂಜಿನಿಯರ್ ಗಳು ಸಾವು
ತುಮಕೂರು: ವೇಗವಾಗಿ ಬಂದ ಕಾರು ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸಾಫ್ಟ್ವೇರ್ ಇಂಜಿನಿಯರ್ ಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನೆಲಹಾಳ್ ಬಳಿಯ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಸಂಭವಿಸಿದೆ.
ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಉತ್ತರ ಪ್ರದೇಶ ಮೂಲದ ಅನಿಕೇತ್ (42), ಅಭೀರ್ (44) ಹಾಗೂ ಆಂಧ್ರ ಪ್ರದೇಶ ಮೂಲದ ಸನ್ಮೋಕ್ತಿ (35) ಮೃತ ಸಾಫ್ಟ್ವೇರ್ ಎಂಜಿನಿಯರ್ ಗಳಾಗಿದ್ದಾರೆ, ಅಪಘಾತದಲ್ಲಿ ಓರ್ವ ಗಂಭೀರವಾಗಿ ಗಾಯಗೊಂಡಿದ್ದರೆ, ಇನ್ನಿಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಮೃತರೆಲ್ಲರೂ ಬೆಂಗಳೂರಿನಲ್ಲಿ ಸಾಫ್ಟ್ವೇರ್ ಎಂಜಿನಿಯರ್ಗಳಾಗಿ ಕೆಲಸ ಮಾಡುತ್ತಿದ್ದರು. ರಜೆ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಗೋಕರ್ಣ, ಮುರುಡೇಶ್ವರ, ಉಡುಪಿ ಕಡೆಗೆ ಕಾರಿನಲ್ಲಿ ಪ್ರವಾಸಕ್ಕೆ ತೆರಳಿದ್ದರು. ಪ್ರವಾಸ ಮುಗಿಸಿ ಬೆಂಗಳೂರಿಗೆ ವಾಪಸ್ ತೆರಳುವಾಗ ಅಪಘಾತ ಸಂಭವಿಸಿದೆ.
ಮಾರುತಿ ಎರಿಟಿಗಾ ಕಾರಿನಲ್ಲಿದ್ದ 6 ಪ್ರಯಾಣಿಕರ ಪೈಕಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಚಾಲಕನ ಸ್ಥಿತಿ ಗಂಭೀರವಾಗಿದ್ದು, ಇನ್ನುಳಿದ ಮೂವರು ಅಪಾಯದಿಂದ ಪಾರಾಗಿದ್ದಾರೆ ಎಂದು ತುಮಕೂರು ಎಸ್ಪಿ ಅಶೋಕ್ ಕೆವಿ ಮಾಹಿತಿ ನೀಡಿದರು.
ಏರಿ ಇದ್ದರಿಂದ ಲಾರಿ ನಿಧಾನವಾಗಿ ಚಲಿಸುತ್ತಿತ್ತು. ಆಗ ಹಿಂದಿನಿಂದ ವೇಗವಾಗಿ ಬಂದು ಕಾರು ಡಿಕ್ಕಿ ಹೊಡೆದಿದೆ. ಚಾಲಕ ಮಲಗಿದ್ದರಾ ಅಥವಾ ಅಜಾಗರೂಕತೆಯಿಂದ ಅಪಘಾತವಾಗಿದೆಯಾ ಎಂಬುದರ ಬಗ್ಗೆ ತನಿಖೆ ಮಾಡುತ್ತಿದ್ದೇವೆ. ಮೃತರು ಎಲ್ಲಿ ಕೆಲಸ ಮಾಡುತ್ತಿದ್ದರು ಎಂಬುದು ಗೊತ್ತಾಗಿಲ್ಲ ಎಂದು ತಿಳಿಸಿದರು.
ಲಾರಿ ಕೆಳಗೆ ಕಾರು ಸಿಕ್ಕಿಕೊಂಡಿತ್ತು. ಬಳಿಕ ಕ್ರೇನ್ ಮೂಲಕ ಕಾರು ತೆರವುಗೊಳಿಸಿ, ಕಾರಲ್ಲಿದ್ದವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಡಿಕ್ಕಿ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಕಾರು ಮತ್ತು ಲಾರಿ ತೆರವುಗೊಳಿಸಿದ ಪೊಲೀಸರು, ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
#software #engineers #die #horrific #accident #malgudiexpress #malgudinews #news #TopNews