ಮಂಗಳೂರಿನ ಉಳ್ಳಾಲದ ಮಸೀದಿಯೊಂದರ ಬಳಿ ಬಾಂಬ್ ಸ್ಫೋಟಿಸುವುದಾಗಿ ಇನ್ಸ್ಟಾಗ್ರಾಂನಲ್ಲಿ ಪ್ರಚೋದನಾಕಾರಿ ಸಂದೇಶ ಹಂಚಿಕೊಂಡ ಕಿಡಿಗೇಡಿಯ ವಿರುದ್ಧ ಉಳ್ಳಾಲ ಪೊಲೀಸರು ಸುಮೊಟೊ ಪ್ರಕರಣ ದಾಖಲಿಸಿದ್ದಾರೆ. ಹಿಂದೂ ಸಂಘಟನೆಯ ಕಾರ್ಯಕರ್ತ ಸುಹಾಸ್ ಶೆಟ್ಟಿ ಎಂಬುವವರ ಭಾವಚಿತ್ರವಿರುವ 'ಶಂಕರ್ 11916' ಎಂಬ ಖಾತೆಯಿಂದ ಈ ವಿಧ್ವಂಸಕ ಕೃತ್ಯಕ್ಕೆ ಬೆಂಬಲ ಕೋರಿ ಪೋಸ್ಟ್ ಹಾಕಲಾಗಿತ್ತು. ಸಾಮಾಜಿಕ ಜಾಲತಾಣದ ಮೇಲೆ ನಿಗಾ ಇರಿಸಿದ್ದ ಪೊಲೀಸ್ ಸಿಬ್ಬಂದಿ ಸಂತೋಷ್ ದೊಡ್ಡಮನಿ ನೀಡಿದ ದೂರಿನನ್ವಯ ಈ ಕ್ರಮ ಕೈಗೊಳ್ಳಲಾಗಿದೆ.ಕೋಮು ಸಾಮರಸ್ಯ ಕದಡುವ ಇಂತಹ ಹಿತಾಸಕ್ತಿಗಳ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ವಿಧಾನಸಭಾ ಅಧ್ಯಕ್ಷ ಯು.ಟಿ. ಖಾದರ್ ಅವರು ಪೊಲೀಸ್ ಕಮಿಷನರ್ ಅವರಿಗೆ ಸೂಚನೆ ನೀಡಿದ್ದಾರೆ. ಉಳ್ಳಾಲದಲ್ಲಿ ಸರ್ವ ಧರ್ಮೀಯರು ಸೌಹಾರ್ದತೆಯಿಂದ ಬದುಕುತ್ತಿದ್ದು, ಇಂತಹ ಬೆದರಿಕೆಗಳ ಮೂಲಕ ಶಾಂತಿ ಭಂಗ ತರಲು ಪ್ರಯತ್ನಿಸುವವರನ್ನು ತಕ್ಷಣವೇ ಬಂಧಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ. ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರು ಕೂಡ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಆರೋಪಿಯ ಪತ್ತೆಗೆ ತನಿಖೆ ಚುರುಕುಗೊಳಿಸಿದ್ದಾರೆ.
ಈ ಘಟನೆಯನ್ನು ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಮುಖಂಡರು ತೀವ್ರವಾಗಿ ಖಂಡಿಸಿದ್ದಾರೆ. ಕ್ಷೇತ್ರದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಗಳನ್ನು ಸಹಿಸದ ಶಕ್ತಿಗಳು ಇಂತಹ ಕೃತ್ಯ ಎಸಗುತ್ತಿವೆ ಎಂದು ಅವರು ಆರೋಪಿಸಿದ್ದಾರೆ. ಧರ್ಮಗಳ ನಡುವೆ ವೈರತ್ವ ಮೂಡಿಸುವ ಉದ್ದೇಶ ಹೊಂದಿರುವ ಈ ಕಿಡಿಗೇಡಿಯನ್ನು ಶೀಘ್ರವೇ ವಿಚಾರಣೆಗೆ ಒಳಪಡಿಸಿ ಸೂಕ್ತ ಕಾನೂನು ಶಿಕ್ಷೆ ನೀಡಬೇಕೆಂದು ಸಾರ್ವಜನಿಕರು ಮತ್ತು ವಿವಿಧ ಸಂಘಟನೆಗಳು ಒತ್ತಾಯಿಸಿವೆ.
#news
#manglore
#PoliceGuidelines
#kannadanews
#dailynews
#ulallà