#🔱 ಭಕ್ತಿ ಲೋಕ #ವೈಶಾಖ ಮಾಸ #ಶ್ರೀನಿವಾಸ ಕಲ್ಯಾಣ 🌷🙏
ವೈಶಾಖ ಮಾಸದ ಪ್ರಯುಕ್ತ ಶ್ರೀನಿವಾಸ ಕಲ್ಯಾಣ
ಒಮ್ಮೆ ಶೌನಕರು ಸೂತ ಮುನಿಗಳ ಬಳಿ ಬಂದು ಹಿಂದೆ ನಿಮ್ಮಿಂದ ಅನೇಕ ಭಗವಂತನ ಮಹಿಮೆಯನ್ನು ಸಾರುವ ವಿಷಯಗಳನ್ನು ತಿಳಿದು ಸುಕೃತಿಗಳಾಗಿದ್ದೇವೆ. ಈಗ ವೆಂಕಟಾಚಲಪತಿಯಾದ ಶ್ರೀ ಹರಿಯ ಮಹಿಮೆಯನ್ನು ಕೇಳಲು ಆಶಿಸಿದ್ದೇವೆ. ಅದನ್ನು ತಿಳಿಸಬೇಕು ಎಂದು ಕೇಳಲು, ಅವಾಗ ಸೂತರು ಹೇಳುತ್ತಾರೆ. "ಮುನಿವರ್ಯರೆ!! ಬಹಳ ಆನಂದದಾಯಕವಾದ ಕೋರಿಕೆಯನ್ನು ಸಲ್ಲಿಸಿದ್ದೀರಿ. ಶ್ರೀ ವೇದವ್ಯಾಸ ದೇವರು ನನಗೆ ಉಪದೇಶ ಮಾಡಿದ ಕ್ರಮದಲ್ಲಿ ನಿಮಗೆ ಹೇಳುತ್ತೇನೆ ಕೇಳಿ."
ಪೂರ್ವದಲ್ಲಿ ಧರ್ಮಿಷ್ಟನಾದ ಜನಕ ರಾಜನು ಧರ್ಮದಿಂದ ರಾಜ್ಯಭಾರ ಮಾಡುತ್ತಾ ಇದ್ದನು. ಅವನಿಗೆ ಕುಶಕೇತುವೆಂಬ ತಮ್ಮ ಇದ್ದನು. ಅವನ ಪತ್ನಿ ಬಹು ಪತಿವ್ರತೆಯು. ಆ ದಂಪತಿಗಳಿಗೆ ಮೂರು ಜನ ಪುತ್ರಿಯರು. ಜನಕರಾಜನಿಗೆ ಜಾನಕಿ ಎಂಬ ನಾಮದಿಂದ ಕರೆಯಲ್ಪಡುವ ಜಗನ್ಮಾತೆ ಪುತ್ರಿಯಾಗಿದ್ದಾಳೆ. ಹೀಗೆ ಜನಕರಾಜನು ಪತ್ನಿ ಪುತ್ರಿ ಮತ್ತು ಸಹೋದರನ ಜೊತೆಯಲ್ಲಿ ಆನಂದವಾಗಿ ರಾಜ್ಯ ಭಾರ ಮಾಡುತ್ತಾ ಇದ್ದನು. ಒಂದು ದಿನ ರಾಜನ ಮನಸ್ಸಿನಲ್ಲಿ ನಾನು ಸರ್ವದಾ ಸುಖವಾಗಿಯೇ ಇರಬೇಕು.ದುಃಖಗಳನ್ನು ಕಣ್ಣಿನಿಂದ ನೋಡಬಾರದು ಎಂದು ಅಪೇಕ್ಷೆ ಪಟ್ಟನು. ಅವನ ಅಪೇಕ್ಷೆ ಪಟ್ಟಿದ್ದು ಶಾಸ್ತ್ರ ಸಮ್ಮತವಲ್ಲವಾದುದರಿಂದ ಭಗವಂತನು ಅವನಿಗೆ ದುಃಖ ಪ್ರದರ್ಶನ ಮಾಡಿದನು. ಜನಕರಾಜನ ತಮ್ಮ ಕುಶಕೇತು ಮರಣ ಹೊಂದಿದ. ಅವನ ಪತ್ನಿ ಸಹ ಅವನ ಜೊತೆಗೆ ಸಹಗಮನ ಮಾಡಿದಳು.
ಅನಾಥರಾದ ಮಕ್ಕಳನ್ನು ಕಂಡು ಕಡು ದುಃಖಿತನಾದ ಜನಕರಾಜನು ಅನ್ನಾಹಾರಗಳನ್ನು ತ್ಯಜಿಸಿದನು. ಆಗ ದೈವಯೋಗದಿಂದ ಕುಲಪುರೋಹಿತರು, ವಾಮದೇವ ಮುನಿಗಳ ಸಹೋದರರು ಆದ ಶತಾನಂದರು ಮಿಥಿಲೆಗೆ ಬಂದರು. ಅರ್ಘ್ಯ ಪಾದಾದಿಗಳಿಂದ ಅವರನ್ನು ಪೂಜಿಸಿ ಸತ್ಕರಿಸಿ ತನಗೆ ಪ್ರಾಪ್ತವಾದ ದುಃಖವನ್ನು ಅವರ ಬಳಿ ಹೇಳಿಕೊಂಡನು. ಆಗ ಶತಾನಂದರು ಹೇಳುತ್ತಾರೆ.
ರಾಜನ್ ಕಲಿಯುಗದಲ್ಲಿ ವೆಂಕಟಗಿರಿ ಮಹಾತ್ಮೆಯನ್ನು ಶ್ರವಣ ಮಾಡುವದರಿಂದ ಸರ್ವಪಾಪವು ಪರಿಹಾರವಾಗುವದು. ನಿನ್ನ ಶತೃನಾಶ, ಪುತ್ರಿಯರ ವಿವಾಹ, ಸಕಲ ಶ್ರೇಯಸ್ಸುಗಳು ಅದರ ಶ್ರವಣದಿಂದ ದೊರಕುತ್ತವೆ. ಈ ಪರ್ವತಕ್ಕೆ ಕೃತಯುಗದಲ್ಲಿ ವೃಷಭಾಚಲವೆಂದು, ತ್ರೇತಾಯುಗದಲ್ಲಿ ಅಂಜನಾಚಲವೆಂದು, ದ್ವಾಪರದಲ್ಲಿ ಶೇಷಾಚಲವೆಂದು, ಕಲಿಯುಗದಲ್ಲಿ ವೆಂಕಟಾಚಲವೆಂದು ಯುಗಭೇದದಿಂದ ಹೆಸರುಂಟಾಗಿದೆ.
ನಾಲ್ಕು ಯುಗದಲ್ಲಿ ಆಯಾ ಹೆಸರು ಬರಲು ಕಾರಣವನ್ನು ಕೇಳಿದಾಗ ಅದಕ್ಕೆ ಶತಾನಂದರು ರಾಜನ್! ಕೃತಯುಗದಲ್ಲಿ ವೃಷಭ ಎಂಬ ರಾಕ್ಷಸನು ಈ ಪರ್ವತದಲ್ಲಿ ವಾಸವಾಗಿದ್ದು ಅಲ್ಲಿದ್ದ ಋಷಿಗಳ ಸಮೂಹಕ್ಕೆ ತೊಂದರೆ ಕೊಡುತ್ತಾ ಇದ್ದನು. ಅವನು ಕೊಡುವ ಕಷ್ಟ ತಾಳದೆ ಮುನಿಗಳು ಭಗವಂತನ ಬಳಿ ಮೊರೆಹೋಗುತ್ತಾರೆ. ಆಗ ಶ್ರೀ ಹರಿಯು ಪ್ರತ್ಯಕ್ಷವಾಗಿ ಅವರಿಗೆ ಅಭಯವಿತ್ತು ಆ ರಾಕ್ಷಸನ ಸಂಹಾರ ಮಾಡುವೆನೆಂದು ಹೇಳುತ್ತಾನೆ. ಆ ವೃಷಭ ಎಂಬ ರಾಕ್ಷಸನು ಪ್ರತಿದಿನವು ತುಂಬುರು ತೀರ್ಥದಲ್ಲಿ ಸ್ನಾನ ಮಾಡಿ, ಅವನ ಬಳಿಯಿರುವ ನರಸಿಂಹ ದೇವರ ಶಾಲಗ್ರಾಮವನ್ನು ಪೂಜಿಸುತ್ತಾ, ಪೂಜೆ ಮುಗಿದ ಮೇಲೆ, ಫಲ ಸಮರ್ಪಣ ರೂಪದಲ್ಲಿ ತನ್ನ ಶಿರಸ್ಸನ್ನು ಖಡ್ಗದಿಂದ ಕತ್ತರಿಸಿ ನರಸಿಂಹ ರೂಪಿಯಾದ ಆ ಶ್ರೀಹರಿಗೆ ಸಮರ್ಪಣೆ ಮಾಡುತ್ತಾ ಇದ್ದ. ಅಚ್ಚರಿಯೆಂದರೆ ಮತ್ತೆ ಅವನ ಶಿರವು ಮತ್ತೆ ಅವನ ದೇಹಕ್ಕೆ ಬಂದು ಕೂಡುತ್ತಾ ಇತ್ತು.
ಶ್ರೀ ಹರಿ ಪ್ರತ್ಯಕ್ಷವಾಗಿ ದರುಶನ ನೀಡುತ್ತಾನೆ. ಭಗವಂತನ ದರ್ಶನದಿಂದ ಆನಂದ ತಡೆಯಲಾರದೆ ಆತ ಮೂರ್ಛೆ ಹೋಗುತ್ತಾನೆ. ನಂತರ ಎಚ್ಚರವಾದ ಮೇಲೆ ಭಗವಂತನ ಬಳಿ ಹೀಗೆಂದು ಕೇಳುತ್ತಾನೆ. ಹೇ ನಾರಾಯಣ!! ನೀನು ದೋಷ ರಹಿತನು. ರಮಾ, ಬ್ರಹ್ಮಾದಿ ಸಕಲ ದೇವತೆಗಳಿಂದ ನೀನು ನಿತ್ಯ ಪೂಜೆಗೊಂಬುವನು ಮತ್ತು ಎಲ್ಲರಿಗಿಂತ ಅತ್ಯುತ್ತಮನಾದವನು ಆಗಿದ್ದೀಯಾ. ನಿನ್ನ ಬಳಿ ನಾನು ಯುದ್ಧ ಮಾಡಬೇಕು ಅನ್ನುವ ಅಪೇಕ್ಷೆ ಉಂಟಾಗಿದೆ. ಅದನ್ನು ನಡೆಸಿಕೊಡಲು ಕೇಳುತ್ತಾನೆ. ಭಗವಂತನು ತಥಾಸ್ತು! ಎಂದು ಹೇಳಿ ಅವನ ಜೊತೆಯಲ್ಲಿ ಯುದ್ಧವನ್ನು ಮಾಡುತ್ತಾನೆ. ಸಕಲ ದೇವತಾ ಋಷಿ ಪರಿವಾರ ಆಗಸದಲ್ಲಿ ನಿಂತು ಈ ಯುದ್ದವನ್ನು ನೋಡುತ್ತಾರೆ. ಅವನ ಯುದ್ದ ಕೌಶಲ್ಯ ಕಂಡು ಭಗವಂತನು ಹರ್ಷಿತನಾಗಿ ಅವನ ಶಿರವನ್ನು ತರಿಯಲು ತನ್ನ ಚಕ್ರವನ್ನು ಪ್ರಯೋಗ ಮಾಡಲು ಸಿದ್ದನಾಗುತ್ತಾನೆ. ಅದಕ್ಕೆ ಅವನು ಭಗವಂತನ ಪಾದಕ್ಕೆ ಎರಗಿ ಸ್ವಾಮಿ! ನಿನ್ನ ಚಕ್ರದ ಪ್ರಭಾವ ಕೇಳಿದ್ದೇನೆ. ಅದರಿಂದ ಮೃತನಾಗಿ ನಾನು ನಿನ್ನ ಮಂದಿರವನ್ನು ಸೇರುತ್ತೇನೆ. ಈ ಪರ್ವತಕ್ಕೆ ನನ್ನ ಹೆಸರು ಬರುವಂತೆ ಅನುಗ್ರಹ ಮಾಡು ಎಂದು ಪ್ರಾರ್ಥನೆ ಮಾಡಿದ. ಆಗ ಶ್ರೀ ಹರಿಯು ಅವನಿಗೆ ವರವನ್ನು ಇತ್ತು ಚಕ್ರದಿಂದ ಅವನನ್ನು ಸಂಹರಿಸಿ, ಮುನಿಗಳ ಕಷ್ಟವನ್ನು ಪರಿಹರಿಸಿದನು. ಈ ಕಾರಣದಿಂದ ಈ ಪರ್ವತಕ್ಕೆ ವೃಷಭಾಚಲ ಹೆಸರು ಬಂದಿತು ಎನ್ನುತ್ತಾರೆ.
ಮುಂದುವರೆಯುತ್ತದೆ...
ಮೂಲ ಲೇಖಕರು ವಿಜಯ ವಿಠ್ಠಲ
ಶುಭವಾಗಲಿ ಶ್ರೀಮತಿ ನಿರ್ಮಲರಾಜೇಶ್