#📜ಪ್ರಚಲಿತ ವಿದ್ಯಮಾನ📜
ಬೆಳಗಾವಿಯಲ್ಲಿ ಬಿಎಸ್ಸಿ ವಿದ್ಯಾರ್ಥಿನಿ ನೇಣಿಗೆ ಶರಣು
ಜನ್ಮದಿನವೇ ಕೊನೆಯ ದಿನ!
ಬೆಳಗಾವಿ: ಜನ್ಮದಿನದಂದೇ ಬಿಎಸ್ಸಿ ಅಂತಿಮ ವರ್ಷದ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಬೆಳಗಾವಿ ನಗರದ ಅಜಂನ ನಗರದಲ್ಲಿರುವ ಹಾಸ್ಟೆಲ್ನಲ್ಲಿ ನಡೆದಿದೆ.
ಹುಕ್ಕೇರಿ ತಾಲೂಕಿನ ಕಟಾಬಳ್ಳಿ ಗ್ರಾಮದ ಕಾವೇರಿ ನಾಯಕ (21) ಮೃತ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ. ಕಾವೇರಿ ಅವರು ಬಿಎಸ್ಸಿ ಅಂತಿಮ ವರ್ಷದ ವಿದ್ಯಾಭ್ಯಾಸ ಮಾಡುತ್ತಿದ್ದು, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದಲ್ಲಿ ವಾಸವಾಗಿದ್ದರು.
ಕಾವೇರಿ ಅವರು ತಮ್ಮ ಜನ್ಮದಿನದಂದೇ ಹಾಸ್ಟೆಲ್ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಕುಟುಂಬಸ್ಥರು ಹಾಗೂ ಸ್ನೇಹಿತರಲ್ಲಿ ಆಘಾತ ಮೂಡಿಸಿದೆ. ಆತ್ಮಹತ್ಯೆಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ.
ಮೃತ ವಿದ್ಯಾರ್ಥಿನಿಗೆ ಸುಮಾರು ಮೂರು ತಿಂಗಳ ಹಿಂದೆ ನಿಶ್ಚಿತಾರ್ಥ ನಡೆದಿದ್ದು, ಪೊಲೀಸ್ ಪೇದೆಯೊಬ್ಬರೊಂದಿಗೆ ಮದುವೆ ನಿಶ್ಚಯವಾಗಿತ್ತು ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಮಗಳ ಸಾವಿನ ಸುದ್ದಿ ತಿಳಿಯುತ್ತಿದ್ದಂತೆಯೇ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಹಾಸ್ಟೆಲ್ ಆವರಣದಲ್ಲಿ ದುಃಖದ ವಾತಾವರಣ ನಿರ್ಮಾಣವಾಗಿದೆ.
ಘಟನಾ ಸ್ಥಳಕ್ಕೆ ಎಪಿಎಂಸಿ ಪೊಲೀಸ್ ಠಾಣೆಯ ಸಿಪಿಐ ಉಸ್ಮಾನ್ ಆವಟಿ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
#BSc #student #commits #suicide #Belagavi #malgudiexpress #malgudinews #news #TopNews


